LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಸಿಎಂ,ಡಿಸಿಎಂ ಯುವಜನತೆಯ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇವತ್ತು ಯುವಜನತೆಯ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯುವಜನತೆ ಕಳೆದ ಎರಡೂವರೆ ವರ್ಷದಿಂದ ಕಣ್ಣೀರು ಹಾಕುತ್ತಿದ್ದಾರೆ. ಪ್ರತಿಭಟನೆ- ಹೋರಾಟ ಮಾಡುತ್ತಿದ್ದಾರೆ; ಇದ್ಯಾವುದನ್ನೂ ಲೆಕ್ಕಿಸದೇ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲೂ ಇದೇ ವಿದ್ಯಾರ್ಥಿಗಳ ಒಕ್ಕೂಟ ಪ್ರತಿಭಟನೆ ಮಾಡಿದರೆ ಲಾಠಿ ಚಾರ್ಜ್ ಮಾಡಿದ್ದರು. ಆಗಲೂ ಸರಕಾರ ಎಚ್ಚತ್ತುಕೊಳ್ಳಲಿಲ್ಲ ಎಂದು ದೂರಿದರು. ಮುಖ್ಯಮಂತ್ರಿಗಳ ಜೊತೆ ಭೇಟಿಗೆ ಸಮಯ ನಿಗದಿಪಡಿಸಲು ರಾಜ್ಯ ಹೈಕೋರ್ಟ್ ಮಧ್ಯಸ್ಥಿಕೆ ವಹಿಸಬೇಕಾಯಿತು ಎಂದು ಅವರು ತಿಳಿಸಿದರು.
ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಕುರ್ಚಿ ಕಾಳಗದಲ್ಲಿ ಬ್ಯುಸಿ ಆಗಿದ್ದಾರೆ. ಒಬ್ಬರು ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಕುರ್ಚಿ ಕಸಿದುಕೊಳ್ಳಲು ಮುಂದಾಗಿದ್ದಾರೆಯೇ ವಿನಾ ಈ ಯುವಜನತೆಯ ಸಮಸ್ಯೆ ಆಲಿಸಲು ಇವರಿಗೆ ಸಮಯ ಸಿಗುತ್ತಿಲ್ಲ ಎಂದು ಟೀಕಿಸಿದರು. ನನ್ನನ್ನು ವಿದ್ಯಾರ್ಥಿಗಳ ಒಕ್ಕೂಟದವರು ಬಂದು ಭೇಟಿ ಮಾಡಿದ್ದರು. 2 ಲಕ್ಷ 85 ಸಾವಿರ ಹುದ್ದೆಗಳು ಇವತ್ತಿಗೂ ಖಾಲಿ ಬಿದ್ದಿವೆ. ಕಾಂಗ್ರೆಸ್ ಸರಕಾರಕ್ಕೆ ಅವುಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಆಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಒಂದೇ ಒಂದು ಹುದ್ದೆಯನ್ನೂ ಭರ್ತಿ ಮಾಡಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವಸಂಪುಟದ ಸದಸ್ಯರು ರಾಜ್ಯದುದ್ದಕ್ಕೂ ಭಾಷಣ ಬಿಗಿಯುತ್ತಿದ್ದಾರೆ. ಆದರೆ, ನಾಡಿನ ಯುವಜನತೆಗೆ ನ್ಯಾಯ ನೀಡಲು ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು. ಮೀಸಲಾತಿ ಗೊಂದಲ ಬಳಸಿಕೊಂಡು ರಾಜ್ಯ ಹೈಕೋರ್ಟ್‍ನಲ್ಲಿ ಸರಿಯಾಗಿ ವಾದ ಮಂಡಿಸದೇ ಕಾಲಹರಣ ಮಾಡಿಕೊಂಡು ಕಾಂಗ್ರೆಸ್ ಸರಕಾರ ಕುಳಿತಿದೆ. ಯುವಜನತೆಯ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಮಾಡುವ ಇಚ್ಛಾಶಕ್ತಿ ಈ ಸರಕಾರದಿಂದ ಕಾಣುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ವಿದ್ಯಾರ್ಥಿಗಳ ಒಕ್ಕೂಟ ಬೆಂಗಳೂರಿನಲ್ಲೂ ಪ್ರತಿಭಟನೆ ಮಾಡಿತ್ತು. ಕಲಬುರ್ಗಿ, ಧಾರವಾಡದಲ್ಲೂ ಪ್ರತಿಭಟನೆ ಮಾಡಿದ್ದರು. ಇವತ್ತು ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಅದೇ ಭಂಡತನದ ಪ್ರದರ್ಶನವನ್ನು ಮಾಡುತ್ತಿದ್ದಾರೆ. ಒಂದೆಡೆ ಅಭಿವೃದ್ಧಿ ಇಲ್ಲ; ಇನ್ನೊಂದೆಡೆ ನೌಕರರಿಗೆ ಸಂಬಳ ಕೊಡಲೂ ಆಗುತ್ತಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೇಮಕಾತಿಯನ್ನೂ ಮಾಡದೇ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು.
ನೇಮಕಾತಿ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಾರೆ. ಸರಕಾರ ಅಧಿಕಾರಕ್ಕೆ ಬಂದು 3 ವರ್ಷವಾಗಿದೆ. ಇಷ್ಟು ಸಮಯ ಮಾಡದವರು ಇನ್ಮೇಲೆ ಮಾಡುತ್ತಾರಾ ಎಂದು ಕೇಳಿದರು. ಇನ್ನೂ ಎಷ್ಟು ದಿನ ಯುವಜನರ ತಾಳ್ಮೆ ಪರೀಕ್ಷೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಅವರ ಕಣ್ಣೀರು ಸರಕಾರಕ್ಕೆ ಕಾಣುತ್ತಿಲ್ಲವೇ ಎಂದು ಕೇಳಿದರು.
ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೂಡಲೇ ಪ್ರಾರಂಭಿಸಬೇಕು..
ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೂಡಲೇ ಪ್ರಾರಂಭಿಸಬೇಕು. ಜೊತೆಗೆ ಕೆಪಿಎಸ್ಸಿ ವ್ಯವಸ್ಥೆ ಸುಧಾರಣೆ ಮಾಡಬೇಕು. ನಿಮ್ಮ ಸರಕಾರ ಇದ್ದಾಗ ಏನು ಮಾಡಿದ್ದೀರಿ ಎಂಬಂಥ ಮಾತುಗಳನ್ನು ಬದಿಗಿಟ್ಟು ಯುವಜನತೆಗೆ ನ್ಯಾಯ ಕೊಡುವ ಕೆಲಸ ಮಾಡಬೇಕೆಂದು ಅವರು ಆಗ್ರಹಿಸಿದರು. ಯುವಜನರ ವಯೋಮಿತಿ ಮೀರುತ್ತಿದೆ. ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಿ ಎಂದು ಒತ್ತಾಯಿಸಿದರು. ಹುಡುಗಾಟಿಕೆ ಮಾಡದೇ ಇದರ ಬಗ್ಗೆ ಗಮನ ಹರಿಸಿ ಎಂದರು.
ಪ್ರಶ್ನೆಗೆ ಉತ್ತರಿಸಿದ ಅವರು, ಹುಬ್ಬಳ್ಳಿಯಲ್ಲಿ ಈಚೆಗೆ ಬಡವರಿಗೆ ಮನೆ ಕೊಡುವುದಾಗಿ ಹೇಳಿ ಸಾವಿರಾರು ಜನರನ್ನು ಸೇರಿಸಿ ದೊಡ್ಡ ಸಮಾರಂಭ ಮಾಡಿ ಅವರ ಬೆನ್ನನ್ನು ಅವರೇ ತಟ್ಟಿಕೊಂಡು ಮುಖ್ಯಮಂತ್ರಿಗಳು ಬಂದಿದ್ದರು. ಹಿಂದಿನ ಬಿಜೆಪಿ ಸರಕಾರ ಆ ಬಡವರಿಗೆ ಮನೆ ಕೊಡಲು ಅಲ್ಲಿನ ಪಾಲಿಕೆಯಲ್ಲಿ ನಿರ್ಣಯ ಅಂಗೀಕರಿಸಿ, ಇದು ಕೇಂದ್ರ ಸರಕಾರದ ಸಹಯೋಗದೊಂದಿಗೆ ಆಗಿರುವಂಥದ್ದು. ಇವರು ಬಂದು ಕಡಿದು ಕಟ್ಟೆ ಹಾಕಿದ್ದಲ್ಲ ಎಂದು ಆಕ್ಷೇಪಿಸಿದರು. ಈ ಸರಕಾರ ಕೇವಲ ಕಾಲಹರಣ ಮಾಡುತ್ತಿದೆ. ಹಿಂದಿನ ಬಿಜೆಪಿ ಸರಕಾರ ಮಾಡಿದ್ದನ್ನು ತಾವು ಮಾಡಿದ್ದಾಗಿ ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಕಳೆದ ಎರಡೂ ಮುಕ್ಕಾಲು ವರ್ಷದಲ್ಲಿ ಇವರೇನೂ ಮಾಡಿಲ್ಲ ಎಂದು ಟೀಕಿಸಿದರು.
ಸರಕಾರದ ಆದ್ಯತೆಯನ್ನು ಸ್ಪಷ್ಟಪಡಿಸಬೇಕು..
ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಒಬ್ಬ ಅನುಭವಿ ಮುಖ್ಯಮಂತ್ರಿ ಅಧಿಕಾರದಲ್ಲಿದ್ದಾರೆ. ಅವರು ಸರಕಾರದ ಆದ್ಯತೆಯನ್ನು ಸ್ಪಷ್ಟಪಡಿಸಬೇಕು. ಸರಕಾರದ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ ಎಂದ ಅವರು, ಶಿವಮೊಗ್ಗದಲ್ಲಿ 10ನೇ ತರಗತಿಯ ಬಾಲಕನ ಬರ್ಬರ ಹತ್ಯೆ ನಡೆದಿದೆ. ಇದನ್ನು ಬಿಜೆಪಿ ಖಂಡಿಸುವುದಾಗಿ ತಿಳಿಸಿದರು.
ಶಿವಾಜಿ ಜಯಂತಿ ಸಂದರ್ಭದಲ್ಲಿ ಕಲ್ಲು ತೂರಿದ ದೇಶದ್ರೋಹಿಗಳ ವರ್ತನೆ ತಮಗೆಲ್ಲ ತಿಳಿದಿದೆ. ದಕ್ಷಿಣ ಕನ್ನಡ, ಯಲ್ಲಾಪುರ, ಶಿವಮೊಗ್ಗದಲ್ಲಿ ಸೇರಿ ಅಹಿತಕರ ಘಟನೆಗಳು ನಡೆದಿವೆ. ಕೆಲವೆಡೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದೆ. ಯಲ್ಲಾಪುರದಲ್ಲಿ ದಲಿತ ಮಹಿಳೆಯ ಬರ್ಬರ ಹತ್ಯೆ ನಡೆಸಲಾಗಿದೆ. ಇವನ್ನು ಗಮನಿಸಿದರೆ ಗೃಹ ಸಚಿವರು ರಾಜ್ಯದಲ್ಲಿ ಇದ್ದಾರಾ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುವಂತಾಗಿದೆ ಎಂದು ನುಡಿದರು.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ