ನವದೆಹಲಿ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಕಾಂಗ್ರೆಸ್ ನಾಯಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಲಭಿಸಿದ್ದು, ಶಾಸಕ ಸ್ಥಾನಕ್ಕೆ ಮರುಜೀವ ಸಿಕ್ಕಂತಾಗಿದೆ.
ಆದಾಯವನ್ನು ಬಹಿರಂಗಪಡಿಸುವುದು ಮಾತ್ರ ಸಾಕೇ? ಅಥವಾ ವ್ಯವಹಾರ ಸಂಬಂಧಿತ ಮಾಹಿತಿಯನ್ನೂ ಕಡ್ಡಾಯವಾಗಿ ಬಹಿರಂಗಪಡಿಸಬೇಕೇ? ಎಂಬ ಪ್ರಶ್ನೆಗೆ ಸಂಬಂಧಿಸಿದಂತೆ ಸಮಗ್ರ ವಿಚಾರಣೆ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಜೊತೆಗೆ, ಎದುರಾಳಿ ಅಭ್ಯರ್ಥಿ ಸಿ. ಮುನಿರಾಜು ಅವರು ಆರು ವಾರಗಳೊಳಗೆ ತಮ್ಮ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ತಿಂಗಳಿಗೆ ಮುಂದೂಡಲಾಗಿದೆ.
ಈ ಹಿಂದೆ, ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ಆಸ್ತಿ ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿಲ್ಲ ಹಾಗೂ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪರ-ವಿರೋಧ ವಾದಗಳನ್ನು ಆಲಿಸಿದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾಗೊಳಿಸಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಆದರೆ, ಮುನಿರಾಜು ಅವರನ್ನು ವಿಜಯಿಯಾಗಿ ಘೋಷಿಸಿರಲಿಲ್ಲ.
ಹೈಕೋರ್ಟ್ ಆದೇಶಕ್ಕೆ ಆರು ತಿಂಗಳೊಳಗೆ ತಡೆಯಾಜ್ಞೆ ಸಿಗದಿದ್ದರೆ, ಬಾಗೇಪಲ್ಲಿ ಕ್ಷೇತ್ರದಲ್ಲಿ ಮರುಚುನಾವಣೆ ಅನಿವಾರ್ಯವಾಗುವ ಸಾಧ್ಯತೆ ಇತ್ತು. ಈ ಹಿನ್ನೆಲೆ ಸುಬ್ಬಾರೆಡ್ಡಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಇದೀಗ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ, ಸುಬ್ಬಾರೆಡ್ಡಿಗೆ ಕಾನೂನು ಹೋರಾಟದಲ್ಲಿ ಪ್ರಥಮ ಜಯ ಸಿಕ್ಕಂತಾಗಿದೆ. ಮುಂದಿನ ವಿಚಾರಣೆಯಲ್ಲಿ ಅಂತಿಮ ತೀರ್ಪು ಏನಾಗಲಿದೆ ಎಂಬುದು ಕಾದು ನೋಡಬೇಕಾಗಿದೆ.