ಬೆಂಗಳೂರು: ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ರಾಜರಾಜೇಶ್ವರಿ ನಗರದಲ್ಲಿ ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ವಿಜಯಲಕ್ಷ್ಮಿ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. ವಿನೀಶ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಸಂಪೂರ್ಣ ಸುಳ್ಳು ಎಂದು ಅವರು ಹೇಳಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಫೋರ್ಡ್ ಎಂಡೆವರ್ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದ ಬಳಿಕ, ಘಟನಾ ಸ್ಥಳದಲ್ಲಿ ವಿನೀಶ್ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿರುವ ವಿಡಿಯೋಗಳು ವೈರಲ್ ಆಗಿದ್ದವು. ಇದೇ ವೇಳೆ, ವಿನೀಶ್ ಅವರೇ ಕಾರು ಚಲಾಯಿಸುತ್ತಿದ್ದರು ಹಾಗೂ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿದ್ದವು.
ಈ ಕುರಿತು ಪ್ರತಿಕ್ರಿಯಿಸಿರುವ ವಿಜಯಲಕ್ಷ್ಮಿ ದರ್ಶನ್, ವಿನೀಶ್ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಗಾಯವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಘಟನೆ ನಡೆದ ವೇಳೆ ಕಾರನ್ನು ವಿನೀಶ್ ಚಾಲನೆ ಮಾಡುತ್ತಿರಲಿಲ್ಲ. ಎಂದಿನಂತೆ ಕುಟುಂಬದ ಚಾಲಕರೇ ವಾಹನ ಚಲಾಯಿಸುತ್ತಿದ್ದರು ಎಂದು ತಿಳಿಸಿದ್ದಾರೆ.
ಅಪಘಾತದಲ್ಲಿ ಭಾಗಿಯಾಗಿದ್ದ ಬೈಕ್ ಸವಾರರು ತಪ್ಪು ತಮ್ಮದೇ ಎಂದು ಒಪ್ಪಿಕೊಂಡು ಸ್ಥಳದಲ್ಲೇ ಕ್ಷಮೆ ಕೇಳಿದ್ದರು. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿನೀಶ್ ಕಾರಿನಿಂದ ಇಳಿದಿದ್ದರು. ಆದರೆ ಆ ಕ್ಷಣಗಳ ವಿಡಿಯೋವನ್ನು ಸಂದರ್ಭಕ್ಕೆ ತಕ್ಕಂತೆ ಪ್ರದರ್ಶಿಸದೇ, ತಪ್ಪು ಅರ್ಥ ಬರುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
"ಒಂದು ಕುಟುಂಬವಾಗಿ ನಾವು ಈಗಾಗಲೇ ಕಷ್ಟದ ಸಮಯವನ್ನು ಎದುರಿಸುತ್ತಿದ್ದೇವೆ. ಇಂತಹ ಪರಿಶೀಲಿಸದ ಹಾಗೂ ಸಂಚಲನ ಮೂಡಿಸುವ ಸುದ್ದಿಗಳು ನಮ್ಮ ನೋವು ಮತ್ತು ಆತಂಕವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಯಾವುದೇ ಸುದ್ದಿಯನ್ನು ಪ್ರಕಟಿಸುವ ಮೊದಲು ಸತ್ಯಾಸತ್ಯತೆ ಪರಿಶೀಲಿಸಬೇಕು. ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ ಅಥವಾ ಹಂಚಿಕೊಳ್ಳಬೇಡಿ" ಎಂದು ವಿಜಯಲಕ್ಷ್ಮಿ ದರ್ಶನ್ ಮನವಿ ಮಾಡಿದ್ದಾರೆ.